ಜುಲೈನಿಂದಲೇ ಪ್ರಾರಂಭ;5 ಕೆಜಿ ಅಕ್ಕಿ ಬದಲು 170 ರೂ.ಹಣ ನೀಡಲು ಸಂಪುಟ ಸಭೆಯಲ್ಲಿನಿ ರ್ಧಾರ.
ಬೆಂಗಳೂರು: ಪಡಿತರ ಚೀಟಿಯಲ್ಲಿ ಒಬ್ಬರಿದ್ದರೆ 170 ರೂ.ಗೆ ಹಾಗೂ ಇಬ್ಬರಿದ್ದರೆ ಅವರು 340 ರೂ.ಗೆ ಅರ್ಹರಾಗಿರುತ್ತಾರೆ. ಐವರು ಸದಸ್ಯರಿದ್ದರೆ ಅವರಿಗೆ ತಿಂಗಳಿಗೆ 850 ರೂಪಾಯಿಯನ್ನು ನೀಡಲಾಗುತ್ತದೆ. ಹೀಗಾಗಿ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಮಾಡಲು ಸರ್ಕಾರ ವ್ಯವಸ್ಥೆ ಮಾಡಿದೆ. ಇದು ಜುಲೈ 1ರಿಂದಲೇ ಜಾರಿಗೆ ಬರಲಿದೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯಿಸಿದರು.

ಕರ್ನಾಟಕ ಸರ್ಕಾರವು ತನ್ನ ಚುನಾವಣಾ ಗ್ಯಾರಂಟಿಯನ್ನು ಪೂರೈಸಲು ಅಗತ್ಯವಾದ ದೊಡ್ಡ ಪ್ರಮಾಣದ ಅಕ್ಕಿಯನ್ನು ಸಂಗ್ರಹಿಸಲು ತೊಂದರೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಫಲಾನುಭವಿಗಳಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ ಪ್ರತಿ ಕೆಜಿಗೆ 34 ರೂ.ನಂತೆ ಹಣ ಪಾವತಿಸಲು ನಿರ್ಧರಿಸಿದೆ.
ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಕೇಂದ್ರವು ಉಚಿತವಾಗಿ ನೀಡುವ ಐದು ಕೆಜಿ ಅಕ್ಕಿ ಜೊತೆಗೆ ತಿಂಗಳಿಗೆ ಹೆಚ್ಚುವರಿಯಾಗಿ ಐದು ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು. ಆದರೆ ಅಕ್ಕಿ ಸಂಗ್ರಹಿಸಲು ಸಾಧ್ಯವಾಗದ ಕಾರಣ ಜುಲೈನಿಂದಲೇ ಹಣ ಪಾವತಿ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ, ನಾವು ಅಕ್ಕಿ ಖರೀದಿಸಲು ಎಲ್ಲಾ ಪ್ರಯತ್ನ ಮಾಡಿದೆವು. ಆದರೆ ನಮಗೆ ಅಗತ್ಯವಿರುವಷ್ಟು ಅಕ್ಕಿಯನ್ನು ಪೂರೈಸಲು ಯಾವುದೇ ಸಂಸ್ಥೆ ಮುಂದೆ ಬಂದಿಲ್ಲ. ಹೀಗಾಗಿ ಅಕ್ಕಿ ಖರೀದಿ ತಡವಾಗುತ್ತಿದೆ. ಹೀಗಾಗಿ ಅಕ್ಕಿ ಬದಲಿಗೆ ಹಣ ನೀಡಲು ಸಂಪುಟ ತೀರ್ಮಾನಿಸಿದೆ. ಒಂದು ಕಾರ್ಡ್ನಲ್ಲಿ ಒಬ್ಬ ವ್ಯಕ್ತಿ ಇದ್ದರೆ, ಆ ವ್ಯಕ್ತಿಗೆ ಅನ್ನ ಭಾಗ್ಯ ಯೋಜನೆಯಡಿ ತಲಾ ಐದು ಕೆಜಿ ಹೆಚ್ಚುವರಿ ಅಕ್ಕಿಗೆ ತಿಂಗಳಿಗೆ 170 ರೂ. ಸಿಗುತ್ತದೆ.ಹೀಗಾಗಿ ಅಕ್ಕಿ ಸಿಕ್ಕ ನಂತರ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನೇ ನೀಡುತ್ತೇವೆ ಎಂದು ಹೇಳಿದ್ದಾರೆ.